Monday, July 23, 2018

#ನೆನಪಿನ ಸಾಗದರಲ್ಲಿ ಕಾಗದದ ದೋಣಿ..!



        'ಶಾಲೆಗೆ ರಜೆಯಂತೆ' ಎಂದು ಕೂಗುತ್ತ ವಾಪಸ್ ಮನೆಗೆ ಬರುವ ಸಂಭ್ರಮ ನೋಡಬೇಕು! ಮಳೆಗಾಲಕ್ಕೆಂದೇ ಹಠ ಮಾಡಿ ತರಿಸಿಕೊಂಡ ಚಪ್ಪಲಿಯಂತೂ ಆಗೆಲ್ಲ ಕಾಲಲ್ಲಿದ್ದಿದ್ದಕ್ಕಿಂತ ಕೈಯಲ್ಲಿದ್ದಿದ್ದೇ ಹೆಚ್ಚು! ಚಪ್ಪಲಿ ಹಾಕಿಕೊಂಡು ಬಿದ್ದರೆ ಅನ್ನೋ ಭಯವೂ ಸೇರಿ ಕಾಲಲ್ಲಿರಬೇಕಾದ್ದು ಕೈಯಲ್ಲಿ ಭದ್ರವಾಗಿರುತ್ತಿತ್ತು. ಕಡ್ಡಿ ಮುರಿದರೂ ಮಳೆಯಿಂದ ರಕ್ಷಿಸುತ್ತಿದ್ದ ಛತ್ರಿ, ಜೋರು ಗಾಳಿಗೆ ಡಿಶ್ ಆಗಿ ಹಾರಾಡಿದ್ದೇ ಹೆಚ್ಚು! ಕಚ್ಚಾಪಟ್ಟಿಯ(Rough Notes) ಹಾಳೆಗಳೆಲ್ಲ ಕಾಗದದ ದೋಣಿಯಾಗಿ ಅದೆಷ್ಟು ದೂರ ತಲುಪಿದ್ದವೋ..! ಇಂದಿಗೂ ನೆನಪಿನ ಸಾಗರದಲ್ಲಿ ಅವೇ ಬಂದು ತೇಲಿದ ಅನುಭವ!

ಅಮೋಘ ಸೌಂದರ್ಯದ ಗಣಿಯಾದ ಮಲೆನಾಡಿನ ಮಳೆಗಾಲ ಸಂಭ್ರಮ ಮತ್ತು ಸಾಹಸದ ಮಿಶ್ರಣ. ಈ ಭಾಗದಲ್ಲಿ ಹುಟ್ಟಿದ ಮಕ್ಕಳಿಗೆ ಸಿಕ್ಕಂಥ ಬಾಲ್ಯ, ಪ್ರಕೃತಿಯೇ ಕಲಿಸಿದ ಜೀವನ ಪಾಠ ಬೆಲೆಕಟ್ಟಲಾರದ ಸಂಪತ್ತು! ಪ್ರತಿ ಮಳೆಗಾಲ ಬಂದಾಗಲೂ ಬಾಲ್ಯದ ನೆನಪುಗಳ ನವಿಲುಗರಿ ಮರಿಹಾಕಿದಂತನ್ನಿಸುತ್ತೆ. ವಿದ್ಯೆ, ಕೆಲಸ, ಮದುವೆ... ಎನ್ನುತ್ತ ಮಲೆನಾಡನ್ನು ಬಿಟ್ಟು ಬದುಕಿನ ಅನಿವಾರ್ಯತೆಗೆ ಹೊಂದಿಕೊಳ್ಳಬೇಕಾದಲೂ ನಮ್ಮೊಂದಿಗುಳಿದಿದ್ದು ಬಾಲ್ಯದ ಮಧುರ ನೆನಪುಗಳೊಂದೇ.

ನಿಜ, ಈ ಮಲೆನಾಡ ಮಳೆ ಭುವಿಗೆ ಬೀಳೋ ಹೊತ್ತು, ಮಣ್ಣಿನ ಪರಿಮಳ ತಂದ ಮತ್ತು, ಜಿಟಿ ಜಿಟಿ ಮಳೆ ಇತ್ತ ನೆನಪಿನ ಮುತ್ತು... ಈ ಸಂಭ್ರಮ ಅನುಭವಿಸಿದವರಿಗೇ ಗೊತ್ತು..!

No comments:

Post a Comment

ಇದು ಬೇರೆ ಏನು ಅಲ್ಲಾ Tax-Terrorism..💯

ದೇಶದ ತೆರಿಗೆ ವ್ಯವಸ್ಥೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ, ಆದರೆ ನಮ್ಮ ತೆರಿಗೆ ವ್ಯವಸ್ಥೆ ಮಾತ್ರ ಕಟು ಟೀಕೆಗೆ, ವಿಮರ್ಶೆಗೆ, ಪ್ರತಿಭಟನೆಗೆ ಯೋಗ್ಯ ಅನ್ನೋದು ಅಕ್ಷರಶ:...